ರಾಯಚೂರು : ಯುಗಾದಿ ಹಬ್ಬದ ಹಿನ್ನೆಲೆ ಶ್ರೀಶೈಲಕ್ಕೆ ತೆರಳುತ್ತಿದ್ದ ಇಬ್ಬರು ಬೈಕ್ ಸವಾರರು ಕಾಡು ಹಂದಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆಯು ಆಂಧ್ರ ಪ್ರದೇಶದ ಕರ್ನೂಲ್ ಸಮೀಪದ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಗಾಯಗೊಂಡವರು ರಾಯಚೂರು ತಾಲ್ಲೂಕಿನ ಉಂಡ್ರಾಳ ದೊಡ್ಡಿ ಗ್ರಾಮದವರು ಎಂದು ಹೇಳಲಾಗುತ್ತಿದೆ. ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಕಾಡು ಹಂದಿ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.
ಅಪಘಾತದ ತೀವ್ರತೆಗೆ ಇಬ್ಬರು ಸವಾರರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಹಾಗೂ ಪ್ರಯಾಣಿಕರು ಗಾಯಾಳುಗಳನ್ನು ರಕ್ಷಿಸಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾಮದಿಂದ ಶ್ರೀಶೈಲಕ್ಕೆ ಪ್ರಯಾಣ ಬೆಳಸಿದ ಇಬ್ಬರು ರಾತ್ರಿ ಹಾಳವೆಂಕಟಾಪುರ ಗ್ರಾಮದಲ್ಲಿ ರಾತ್ರಿ ತಂಗಿದ್ದರು. ಬೆಳಗಿನ ಜಾವು 3 ಗಂಟೆ ಸುಮಾರಿಗೆ ಅಲ್ಲಿಂದ ಹೊರಟಿದ್ದು, ಈ ವೇಳೆ ಅಪಘಾತ ಜರುಗಿದೆ ಎನ್ನಲಾಗುತ್ತಿದೆ. ದುಳ್ಳಯ್ಯ(28) ಶಂಕರ್ (27) ಪ್ಲಾಟೀನ ಎಂಬ ಇಬ್ಬರು ಬೈಕ್ ಸವಾರರ ಗಂಭೀರ ಗಾಯಗೊಂಡಿದ್ದು, ಇವರ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ವಾಹನ ಚಲಾಯಿಸುವಾಗ ಹೆಚ್ಚು ಜಾಗರೂಕತೆಯಿಂದ ಚಾಲನೆ ಮಾಡಬೇಕೆಂದು ಪೊಲೀಸರು ಸೂಚನೆ ನೀಡಿದ್ದಾರೆ. ಕಾರಣ ಬೇಸಿಗೆ ಇರುವ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳಾದ, ಹಂದಿ, ಜಿಂಕೆ, ಚಿಗರೆ ಸೇರಿದಂತೆ ಸಾಧುಪ್ರಾಣಿಗಳು ರಸ್ತೆಯಲ್ಲಿ ಓಡಾಡುತ್ತಾ ಇರುತ್ತವೆ ಈ ಹಿನ್ನೆಲೆಯಲ್ಲಿ ವಾಹನ ಸವಾರರು ವೇಗವಾಗಿ ಚಲಾಯಿಸದೆ ಮೆಲ್ಲಗೆ ಪ್ರಯಾಣಿಸುವುದು ಒಳಿತು ಎಂದು ಸಲಹೆ ನೀಡಿದ್ದಾರೆ.
ಗಾಯಗೊಂಡ ಬೈಕ್ ಸವಾರರ ಸಂಪೂರ್ಣ ವಿವರಗಳು ಇನ್ನೂ ಲಭ್ಯವಾಗಿಲ್ಲ. ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ಮುಂದುವರೆದಿದೆ.